ಟ್ಯೂಷನ್ಗೆ ಹೋಗ್ತಿದ್ದ ಬಾಲಕನ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ! ಬೆಂಗಳೂರಿನಲ್ಲಿ ಟ್ಯೂಷನ್ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ ಹಣಕ್ಕಾಗಿ ಅಪಹರಿಸಿ ಕೊಲೆ ಮಾಡಲಾಗಿದೆ.
ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದ ಕಿಡ್ನಾಪರ್ಗಳು ಬಾಲಕನನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿ, ಅತ್ಯಂತ ಅಮಾನುಷ ಘಟನೆಗೆ ಸಾಕ್ಷಿ ಆಗಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನುಷವಾದ ಘಟನೆ ನಡೆದಿದೆ. ಕೇವಲ 5 ಲಕ್ಷ ರೂ. ಹಣಕ್ಕಾಗಿ ಸಂಜೆ ಟ್ಯೂಷನ್ಗೆ ಹೋಗಿದ್ದ ಮಗನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.
ಮಗುವಿನ ತಂದೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ವಿಚಾರ ಕಿಡ್ನಾಪರ್ಸ್ಗೆ ಗೊತ್ತಾದ ಕೂಡಲೇ, ಆ ಬಾಲಕನನ್ನು ರಸ್ತೆ ಬಳಿಯೇ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಅತ್ಯಂತ ಅಮಾನವೀಯ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಟ್ಯೂಷನ್ ಹೋಗಿ ಮನೆಗೆ ಮರಳುತ್ತಿದ್ದ ಬಾಲಕನೊಬ್ಬನನ್ನು ಅಪಹರಿಸಿ, ಬಳಿಕ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬನ್ನೇರುಘಟ್ಟ ಸಮೀಪ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಅರಕೆರೆ ಪ್ರದೇಶದ ಶಾಂತಿನಿಕೇತನ ಬಡಾವಣೆಯಲ್ಲಿ ನೆಲೆಸಿರುವ ಕಾಲೇಜಿನ ಪ್ರೊಫೆಸರ್ ಕುಟುಂಬದ 7 ತರಗತಿಯ ವಿದ್ಯಾರ್ಥಿ ನಿಶ್ಚಿತ್ (12) ಎಂಬಾತನು ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಕೆಲವು ವ್ಯಕ್ತಿಗಳು ಬಾಲಕನನ್ನು ಅಪಹರಿಸಿದ್ದಾರೆ.
5 ಲಕ್ಷ ರೂಪಾಯಿ ಬೇಡಿಕೆಗೆ ಫೋನ್ ಕರೆ:
ನಿಶ್ಚಿತ್ ಕಿಡ್ನಾಪ್ ಆಗುತ್ತಿದ್ದಂತೆ, ಕೆಲವೇ ಹೊತ್ತಿನಲ್ಲಿ ಪೋಷಕರಿಗೆ ಅಪರಿಚಿತ ಸಂಖ್ಯೆಗಳಿಂದ ಕರೆ ಬಂದಿದೆ.
ಆಗ ಕಿಡ್ನಾಪರ್ಸ್ ನಿಮಗೆ ನಿಮ್ಮ ಮಗ ಬೇಕಿದ್ದರೆ ಕೂಡಲೇ 5 ಲಕ್ಷ ರೂಪಾಯಿ ಹಣವನ್ನು ತೆಗೆದುಕೊಂಡು ಬರುವಂತೆ ಬೇಡಿಕೆ ಇಟ್ಟಿದ್ದಾರೆ.
ಜೊತೆಗೆ ಪೊಲೀಸರಿಗೆ ಮಾಹಿತಿ ನೀಡದಂತೆಯೂ ಬೆದರಿಕೆ ಹಾಕಿದ್ದಾರೆ. ಆದರೆ, ಕಾಲೇಜು ಪ್ರೊಫೆಸರ್ ತನ್ನ ಮಗನನ್ನು ಉಳಿಸಿಕೊಡುವಂತೆ ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿ ಶೋಧ ಕಾರ್ಯಾಚರಣೆ:
ದೂರು ದಾಖಲಾಗುತ್ತಿದ್ದಂತೆಯೇ ಹುಳಿಮಾವು ಪೊಲೀಸರು ಸಿಸಿಟಿವಿ ಫುಟೇಜ್, ಮೊಬೈಲ್ ಲೊಕೇಶನ್ ಟ್ರಾಕಿಂಗ್ ಮೂಲಕ ತನಿಖೆಗೆ ಚುರುಕುಗೊಳಿಸಿದ್ದಾರೆ.
ಬಾಲಕನನ್ನು ಹುಡುಕುವುದಕ್ಕೆ, ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಇತ್ತ ಬಾಲಕನ ಪೋಷಕರು 5 ಲಕ್ಷ ರೂ. ಹಣವನ್ನು ಸಿದ್ಧಪಡಿಸಿ ಕಿಡ್ನಾಪರ್ಸ್ಗೆ ಕೊಟ್ಟು ಮಗನನ್ನು ಕರೆದುಕೊಂಡು ಬರಲು ಸಿದ್ಧವಾಗಿದ್ದರು.
ಆದರೆ, ಪೊಲೀಸರಿಗೆ ಕಿಡ್ನಾಪ್ ಮಾಡಿದ್ದ ಬಗ್ಗೆ ದೂರು ಕೊಟ್ಟ ವಿಚಾರ ಕಿಡ್ನಾಪರ್ಸ್ಗೆ ತಿಳಿದ ಕೂಡಲೇ ತಾವು ಸಿಕ್ಕಿಬೀಳುವ ಭಯದಿಂದ ಬಾಲಕನನ್ನು ಕೈಕಟ್ಟಿ ಥಳಿಸಿ ಕೊಲೆ ಮಾಡಿ, ರಸ್ತೆ ಬದಿಯ ಕಲ್ಲು ಬಂಡೆಯ ಮೇಲೆ ಅಲ್ಪಸ್ವಲ್ಪ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಪರಾರಿ ಆಗಿದ್ದಾರೆ.
