ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ! ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ನಗರದ ವಿಕ್ಟೋರಿಯಾ ಮತ್ತು ವಾಣಿವಿಲಾಸ್ ಸಾರ್ವಜನಿಕ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣುಪ್ರಕಾಶ್ ಪಾಟೀಲ್ ಅವರೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಆಸ್ಪತ್ರೆಯ ಒಳರೋಗಿಗಳು, ಹೊರರೋಗಿಗಳು ಮತ್ತು ಅವರ ಸಹಾಯಕರೊಂದಿಗೆ ಮಾತಾಡಿದರು.
ಇದೇ ವೇಳೆ ರೋಗಿಗಳ ಜೊತೆ ವೈದ್ಯರು ಸಹಾನುಭೂತಿಯಿಂದ ವರ್ತಿಸಬೇಕು ಎಂದು ಸೂಚನೆ ನೀಡಿದರು.
ನಂತರ ಮಾಧ್ಯಮಗಳೊಂದಿಗೆ ಮಾತಾಡಿದ ಸಿಎಂ, ತಮ್ಮೊಂದಿಗೆ ಮಾತಾಡಿದ ರೋಗಿಗಳು ಮತ್ತು ಅವರ ಸಹಾಯಕರು ಆಸ್ಪತ್ರೆಗಳಲ್ಲಿ ಸಿಗುತ್ತಿರುವ ಸೇವೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ವೈದ್ಯರು ಹಾಗೂ ಬೇರೆ ಸಿಬ್ಬಂದಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಅಂತ ಹೇಳಿದರು ಎಂದರು.
ಯಾರೂ ವೈದ್ಯರ ಬಗ್ಗೆ ಆರೋಪ ಮಾಡಿಲ್ಲ. ವೈದ್ಯರು ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಊಟ ಚೆನ್ನಾಗಿ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ಸಿಎಂ ತಿಳಿಸಿದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಉಚಿತವಾಗಿ ಮಾಡಿಕೊಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಇದಕ್ಕೆ ಲಕ್ಷಾಂತರ ರೂ. ವೆಚ್ಚ ಆಗುತ್ತದೆ.
ಹೀಗಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಲು ಬೇಡಿಕೆ ಇದೆ. ಈ ಬಗ್ಗೆ ಪ್ರಸ್ತಾವನೆ ಇದೆ. ಸರ್ಕಾರ ಅದನ್ನು ಪರಿಗಣಿಸುತ್ತದೆ ಎಂದು ಹೇಳಿದರು.