ಸಿಪಿ ರಾಧಾಕೃಷ್ಣನ್ NDA ಉಪರಾಷ್ಟ್ರಪತಿ ಅಭ್ಯರ್ಥಿ! ನವದೆಹಲಿ: ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಎನ್ಡಿಎ(NDA) ಉಪರಾಷ್ಟ್ರಪತಿ (Vice President) ಅಭ್ಯರ್ಥಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿದೆ.
ಇಂದು ಸಂಜೆ ಬಿಜೆಪಿ (BJP) ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಪಿ ರಾಧಾಕೃಷ್ಣನ್ ಹೆಸರನ್ನು ಅಂತಿಮಗೊಳಿಸಲಾಯಿತು.
ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರುವ ರಾಧಾಕೃಷ್ಣನ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದರು.
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಅಕ್ಟೋಬರ್ 20, 1957 ರಂದು ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ್ದಾರೆ.
ರಾಧಾಕೃಷ್ಣನ್ ಅವರು ತಮ್ಮ ರಾಜಕೀಯ ಪ್ರಯಾಣದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಜುಲೈ 31, 2024 ರಂದು ಮಹಾರಾಷ್ಟ್ರದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಇದಕ್ಕೂ ಮೊದಲು ಅವರು ಫೆಬ್ರವರಿ 18, 2023 ರಿಂದ ಜುಲೈ 30, 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ಅವರು ಮಾರ್ಚ್ ನಿಂದ ಜುಲೈ 2024 ರವರೆಗೆ ತೆಲಂಗಾಣದ ರಾಜ್ಯಪಾಲರಾಗಿ ಮತ್ತು ಮಾರ್ಚ್ ನಿಂದ ಆಗಸ್ಟ್ 2024 ರವರೆಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಕರ್ತವ್ಯಗಳನ್ನು ನಿರ್ವಹಿಸಿದ್ದರು.